ಮಂಡ್ಯ :ಜಲ ಶಕ್ತಿ ಅಭಿಯಾನದ ಅಂಗವಾಗಿ "ಜಲ ಸಂಚಾಯಿ ಜನ ಭಾಗಿದಾರಿ (JSJB)" ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ.
ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪ್ರಮಾಣದ ನೀರು ಒದಗಿಸುವ ಹಾಗೂ ನೀರಿನ ಸಮಸ್ಯೆ ನಿವಾರಿಸಲು ಕೈಗೊಂಡ ಜಲಶಕ್ತಿ ಅಭಿಯಾನದ ಚಟುವಟಿಕೆಗಳನ್ನು ಯಶಸ್ವಿಯಾಗಿ ಹಾಗೂ ಪರಿಣಾಮಕಾರಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ಪ್ರಶಸ್ತಿಯ ಜೊತೆಗೆ 25 ಲಕ್ಷ ರೂ ನಗದು ಬಹುಮಾನವನ್ನು ನೀಡಲಾಗುತ್ತಿದೆ.
ಮೈಸೂರು ವಿಭಾಗದ 8 ಜಿಲ್ಲೆಗಳ ಪೈಕಿ ಪ್ರಥಮ ಸ್ಥಾನ: ಜಲ ಸಂಚಾಯಿ ಜನ ಭಾಗಿದಾರಿ ಅಭಿಯಾನದಡಿ ರಾಜ್ಯಗಳನ್ನು 5 ವಲಯಗಳಾಗಿ ವಿಂಗಡಿಸಲಾಗಿದ್ದು, 3ನೇ ವಲಯದಲ್ಲಿ ಆಂದ್ರಪ್ರದೇಶ, ತೆಲಾಂಗಣ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿವೆ. ಈ ಪೈಕಿ ಕರ್ನಾಟಕ ರಾಜ್ಯದ 7 ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ ಘೋಷಿಸಲಾಗಿದ್ದು, ಮೈಸೂರು ವಿಭಾಗದ ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ.
“ಜಲ ಸಂಚಯ – ಜನ ಭಾಗಿದಾರಿ” ಅಭಿಯಾನದಡಿ ಜಲ ಸಂರಕ್ಷಣೆ ಹಾಗೂ ಮಳೆ ನೀರಿನ ಸಂಗ್ರಹಣೆಯಂತಹ ಚಟುವಟಿಕೆಗಳಲ್ಲಿ ಸಮುದಾಯದ ಭಾಗವಹಿಸುವಿಕೆಯನ್ನು ಬಲಪಡಿಸುವುದಾಗಿದ್ದು, ಜನರಿಗೆ ನೀರಿನ ಮಹತ್ವ , ನೀರಿನ ಸಂರಕ್ಷಣೆ ವಿಧಾನಗಳ ಬಗ್ಗೆ ಅರಿವು ಮೂಡಿಸುವಲ್ಲಿ ಮಂಡ್ಯ ಜಿಲ್ಲೆ ಉತ್ತಮ ಸಾಧನೆ ಮಾಡಿದೆ.
ಜಲಸಂಚಯ ಎಂದರೇನು? “ನೀರಿಗಾಗಿ ಒಂದಾಗಿ, ಪ್ರತಿ ಹನಿ ನೀರನ್ನು ಸಂರಕ್ಷಿಸಿ“ ಎಂಬ ಧ್ಯೇಯದೊಂದಿಗೆ ಜಲಸಂಚಯ ಜನಭಾಗಿದಾರಿ 1.0 ಅಭಿಯಾನವು ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು, ಮಳೆ ನೀರನ್ನು ಸಂಹಗ್ರಹಿಸುವುದು, ಜಲ ಸಂರಕ್ಷಣೆಯ ಸಂಸ್ಕೃತಿಯನ್ನು ಬೆಳೆಸುವುದು, ಹವಾಮಾನ ಸ್ಥಿತಿಗತಿಯನ್ನು ಉತ್ತೇಜಿಸುವುದು ಮತ್ತು ನೀರಿನ ಗುಣಮಟ್ಟವನ್ನು ಸುಧಾರಿಸುವ ಗುರಿ ಹೊಂದಿದೆ.
ಜಲಶಕ್ತಿ ಉದ್ದೇಶ: ನೀರಿನ ಕೊರತೆ ನಿವಾರಿಸುವುದು, ಮಳೆ ನೀರನ್ನು ಹರಿಯುವಂತೆ ಮಾಡುವುದು, ಹರಿಯುವ ನೀರನ್ನುತಡೆಯುವುದು, ತಡೆದ ನೀರನ್ನು ಇಂಗಿಸುವುದು, ಜಲ ಸಂಪನ್ಮೂಲಗಳ ಸಂರಕ್ಷಣೆ, ಮರುಸ್ಥಾಪನೆ, ಮರುಬಳಕೆಗೆ ಉತ್ತೇಜಿಸುವುದು, ಅಮೃತ ಸರೋವರಗಳ ರಚನೆ ಮತ್ತು ನವೀಕರಣದ ಮೂಲಕ ನೀರಿನ ಸಂಗ್ರಹಣೆ ಹೆಚ್ಚಿಸುವುದು ಜಲಶಕ್ತಿ ಅಭಿಯಾನದ ಉದ್ದೇಶವಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಇತರೆ ಯೋಜನೆಗಳಡಿ ಜಿಲ್ಲೆಯು 2024ರ ಏಪ್ರಿಲ್ 1 ರಿಂದ 2025 ರ ಮಾರ್ಚ್ 31 ರ ವರೆಗೆ 7,192 ಜಲಸಂರಕ್ಷಣೆ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಜಲಸಂಚಯ ಫೋರ್ಟಲ್ ನಲ್ಲಿ ದಾಖಲಿಸಿದ್ದು, ಇವುಗಳಲ್ಲಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳಾದ ಬದು ನಿರ್ಮಾಣ, ಬೋರ್ ವೆಲ್ ರೀಚಾರ್ಜಾ ಪಿಟ್, ಸೋಕ್ ಪಿಟ್, ಸಮಗ್ರ ಕೆರೆ ಅಭಿವೃದ್ಧಿ, ಕಟ್ಟೆಗಳ ಅಭಿವೃಧ್ಧಿ, ಕಲ್ಯಾಣಿಗಳ ಜಿರ್ಣೋದ್ಧಾರ, ಮಳೆ ನೀರು ಕೊಯ್ಲು, ತೆರೆದ ಬಾವಿ, ನಾಲಾ ಹೊಳೆತ್ತುವುದು, ಚೆಕ್ ಡ್ಯಾಂ ಕಾಮಗಾರಿಗಳು ಅನುಷ್ಟಾನಗೊಂಡಿದ್ದವು, ಸದರಿ ಕಾಮಗಾರಿಗಳನ್ನು ಕೇಂದ್ರ ನೋಡಲ್ ಅಧಿಕಾರಿಗಳ ತಂಡವು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ತಿಳಿಸಿದರು.